ಸೋಮವಾರಪೇಟೆ,ಜ.21: ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿಯ ನೌಕರನ ಮೇಲೆ ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಹಲ್ಲೆ ನಡೆಸಿದ್ದು, ಅವರನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ತಾಲೂಕು ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಸೇನೆಯ ಜಿಲ್ಲಾಧ್ಯಕ್ಷ ಟಿ.ಈ. ಸುರೇಶ್, ತಾ.ಪಂ. ಕಚೇರಿ ನೌಕರ ರಂಜಿತ್ ಅವರ ಮೇಲೆ ಜಿ.ಪಂ. ಸಿಇಓ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ಈ ದೃಶ್ಯಗಳು ಸಿ.ಸಿ.ಕ್ಯಾಮೆರಾದಲ್ಲೂ ಸೆರೆಯಾಗಿದ್ದು, ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಧಿಕಾರಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಕ್ಷಣ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಬೇಕು. ಪೊಲೀಸರು ಕಾನೂನು ಭಾಗದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದರು.

ನೌಕರನಿಗೆ ಆದ ದೌರ್ಜನ್ಯದ ಬಗ್ಗೆ ಶಾಸಕ ಅಪ್ಪಚ್ಚು ರಂಜನ್, ರಾಜ್ಯ ಎಸ್‍ಸಿ ಎಸ್‍ಟಿ ಆಯೋಗದ ಅಧ್ಯಕ್ಷ ಮುನಿಯಪ್ಪ ಅವರ ಗಮನಕ್ಕೆ ತಂದ ಸಂದರ್ಭ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ದಲಿತ ವಿರೋಧಿ ಅಧಿಕಾರಿಯನ್ನು ಜಿಲ್ಲೆಯಿಂದ ಬೇರೆಡೆಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಪ್ರಬುದ್ಧ ನೌಕರರ ಒಕ್ಕೂಟದ ಉಪಾಧ್ಯಕ್ಷ ಸತೀಶ್ ,ದಲಿತ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜೆ.ಎಲ್. ಜನಾರ್ಧನ್, ಸಂಘಟನಾ ಕಾರ್ಯದರ್ಶಿ ಕೆ.ಎನ್. ಹೂವಯ್ಯ, ಶಾಂತಳ್ಳಿ ಗಿರೀಶ್, ನಿರ್ದೇಶಕ ರಾಮಕೃಷ್ಣ, ಖಜಾಂಚಿ ಎಸ್.ಎ. ಪ್ರತಾಪ್ ಉಪಸ್ಥಿತರಿದ್ದರು.