ಕೂಡಿಗೆ, ಫೆ. 10: ಕೂಡಿಗೆ ಗ್ರಾಮ ಪಂಚಾಯಿತಿಗೆ ಬ್ಯಾಡಗೊಟ್ಟ ಗ್ರಾಮದಲ್ಲಿ ಈಗಾಗಲೇ ಸರ್ವೆ ನಂ. 11 ರಲ್ಲಿ ಒಂದೂವರೆ ಎಕರೆ ಮಂಜೂರಾಗಿದ್ದು, ಈ ಜಾಗವನ್ನು ದಿಡ್ಡಳ್ಳಿ ನಿರಾಶ್ರಿತರಿಗೆ ಮನೆ ನಿರ್ಮಿಸುವ ಸಂದರ್ಭ ಒತ್ತುವರಿಯಾಗಿದೆ ಎಂಬ ಕಾರಣದಿಂದ ಜಿಲ್ಲಾಧಿಕಾರಿಯವರಿಗೆ ಕೂಡಿಗೆ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ವಸತಿ ರಹಿತ ಸಾರ್ವಜನಿಕರು ಮನವಿ ಸಲ್ಲಿಸಿ, ಧರಣಿ ನಡೆಸುವದಾಗಿ ತಿಳಿಸಿದ್ದರು.

ಈ ಸಂಬಂಧ ಜಿಲ್ಲಾಧಿಕಾರಿ ಶ್ರೀ ವಿದ್ಯಾ ಅವರು, ಕೂಡಿಗೆ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳಿಗೆ ತಾಲೂಕು ತಹಶೀಲ್ದಾರ್ ಮಹೇಶ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಚಿಕ್ಕಬಸವಯ್ಯ, ಸರ್ವೆ ಅಧಿಕಾರಿಗಳು ಮೀಸಲಾಗಿದ್ದ ಜಾಗದಲ್ಲಿ ಸರ್ವೆ ಕಾರ್ಯ ನಡೆಸಿದರು.

ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ಹೋಬಳಿ ಕಂದಾಯ ನಿರೀಕ್ಷಕ ನಂದಕುಮಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವಾಮಿನಾಯಕ್, ಗ್ರಾಮ ಲೆಕ್ಕಿಗ ಗೌತಮ್ ಹಾಗೂ ಕೂಡಿಗೆ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಇದ್ದರು.