ಕುಶಾಲನಗರ, ಫೆ 20: ತೆರವುಗೊಳಿಸಲಾಗುತ್ತಿರುವ ಕುಶಾಲನಗರ ಪಟ್ಟಣ ಪಂಚಾಯ್ತಿ ಅಂಗಡಿ ಮಳಿಗೆಗಳ ಕಟ್ಟಡಕ್ಕೆ ಪಂಚಾಯ್ತಿ ಅನುಮತಿಯಿಲ್ಲದೆ ಬಣ್ಣ ಬಳಿದಿರುವ ಘಟನೆಯೊಂದು ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪಂಚಾಯ್ತಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಪಟ್ಟಣ ಪಂಚಾಯ್ತಿಯ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣ ಸಂಬಂಧ ಕಟ್ಟಡಗಳನ್ನು ತೆರವುಗೊಳಿಸುತ್ತಿರುವ ಕಾರ್ಯಾಚರಣೆ ನಡೆಯುತ್ತಿದ್ದು, ಈ ಸಂದರ್ಭ ಕೆಲವು ವ್ಯಕ್ತಿಗಳು ಕಟ್ಟಡಕ್ಕೆ ಸುಣ್ಣ ಬಳಿದಿರುವ ಬಗ್ಗೆ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದ್ದು, ತಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಠಾಣಾಧಿಕಾರಿ ಜಗದೀಶ್ ತಿಳಿಸಿದ್ದಾರೆ.