ಮಡಿಕೇರಿ, ಏ. 5: ಕರ್ನಾಟಕ ವಿಧಾನಸಭೆಗೆ ಮೇ 12ರಂದು ನಡೆಯಲಿರುವ ಚುನಾವಣೆ ಸಂಬಂಧ ಇಂದು ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿರುವ ಓಂಪ್ರಕಾಶ್ ರಾವತ್ ಸಭೆ ನಡೆಸಿದರು. ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.ಪಾರದರ್ಶಕ ಹಾಗೂ ಶಾಂತಿಪೂರ್ಣವಾಗಿ ಸಾರ್ವತ್ರಿಕ ಚುನಾವಣೆ ಕುರಿತು ಚರ್ಚಿಸಿದ್ದು, ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಕೈಗೊಂಡಿರುವ ಕ್ರಮಗಳು ಮತ್ತು ಮುಂದಿನ ರೂಪುರೇಷೆ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಐ. ಶ್ರೀವಿದ್ಯಾ, ಪೊಲೀಸ್ ಅಧೀಕ್ಷಕ ಪಿ. ರಾಜೇಂದ್ರ ಪ್ರಸಾದ್, ಮುಖ್ಯ ಚುನಾವಣಾಧಿಕಾರಿಗಳಿಗೆ ವಿವರ ಮಾಹಿತಿ ನೀಡಿದ್ದಾಗಿ ತಿಳಿದು ಬಂದಿದೆ.