*ಗೋಣಿಕೊಪ್ಪಲು, ಏ. 28: ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ವಿಕಲಚೇತನ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಸ್ಥಳೀಯ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,

ಭಾರತ ಚುನಾವಣಾ ಆಯೋಗದ ಸೂಚನೆ ಮೇರೆಗೆ ಸ್ವೀಪ್ ಕೊಡಗು ನೇತೃತ್ವದಲ್ಲಿ ವಿಕಲಚೇನತರು ದ್ವಿಚಕ್ರವಾಹದಲ್ಲಿ ಮೆರವಣಿಗೆ ನಡೆಸಿ ಮತದಾನದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಸಂದೇಶ ಸಾರಿದರು.

ಬಸ್ ನಿಲ್ದಾಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಆರ್.ಗೋವಿಂದರಾಜು ಮತದಾನ ಪ್ರತಿಯೊಬ್ಬರ ಹಕ್ಕಾಗಿದೆ. ಇದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ತಮ್ಮ ಕರ್ತವ್ಯ ಮೆರೆಯಬೇಕು ಎಂದು ಹೇಳಿದರು.

ಬಸ್ ನಿಲ್ದಾಣದಿಂದ ಆರಂಭಗೊಂಡ ಜಾಥಾ ಮುಖ್ಯ ರಸ್ತೆಯಲ್ಲಿ ಸಾಗಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ತಾಲೂಕು ಪಂಚಾಯಿತಿ ಇಒ ಜಯಣ್ಣ, ಬಿಎಲ್‍ಒ ಅಧಿಕಾರಿಗಳು ಹಾಗೂ ವಿಕಲ ಚೇತನ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.