ಮಡಿಕೇರಿ, ಜು. 25: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿಯ ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆ. 11 ರಂದು ಕಗ್ಗೋಡ್ಲು ಗ್ರಾಮದ ದಿ. ಸಿ.ಡಿ. ಬೋಪಯ್ಯ ಅವರ ಗದ್ದೆಯಲ್ಲಿ ರಾಜ್ಯಮಟ್ಟದ ಮುಕ್ತ ಕೆಸರುಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಪತ್ರಿಕಾ ಹೇಳಿಕೆ ನೀಡಿರುವ ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ನವೀನ್ ದೇರಳ 27 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ಬಗ್ಗೆ ಮಾಹಿತಿ ನೀಡಿದರು. ಕ್ರೀಡಾ ಕೂಟದಲ್ಲಿ ಪುರುಷ ವಿಭಾಗಕ್ಕೆ ವಾಲಿಬಾಲ್, ಮಹಿಳೆಯರ ವಿಭಾಗಕ್ಕೆ ಥ್ರೋಬಾಲ್ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರಿಗೆ ಹಗ್ಗಜಗ್ಗಾಟ ಸ್ಪರ್ಧೆಯನ್ನು ನಡೆಸಲಾಗುವದು. ಕಿರಿಯ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 50ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 100 ಮೀ. ಓಟ ಪ್ರೌಢ ಶಾಲಾ ಬಾಲಕರಿಗೆ 200 ಮೀ. ಓಟ ಹಾಗೂ ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರಿಗೆ 300 ಮೀ ಓಟದ ಸ್ಪರ್ಧೆ ನಡೆಯಲಿದೆ. ಸಾರ್ವಜನಿಕ ಪುರುಷರು ಮತ್ತು ಮಹಿಳೆಯರಿಗೆ ಮುಕ್ತ ಓಟ ಹಾಗೂ ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ವಾಲಿಬಾಲ್, ಥ್ರೋಬಾಲ್ ಮತ್ತು ಹಗ್ಗ ಜಗ್ಗಾಟ ತಂಡಗಳಿಗೆ ಮೈದಾನ ಶುಲ್ಕ 500 ರೂ. ಆಗಿದ್ದು, ಅದನ್ನು ಆಯಾ ತಂಡಗಳು ಆ. 10ರ ಮಧ್ಯಾಹ್ನ 2 ಗಂಟೆಯ ಒಳಗಾಗಿ ಪಾವತಿಸುವಂತೆ ನವೀನ್ ದೇರಳ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಆಕರ್ಷ ಪಾರಿತೋಷಕ ಮತ್ತು ನಗದು ಬಹುಮಾನಗಳನ್ನು ನೀಡಲಾಗುವದು. ಪ್ರೌಢಶಾಲಾ ವಿಭಾಗದ ಹಗ್ಗ ಜಗ್ಗಾಟದಲ್ಲಿ ಭಾಗವಹಿಸುವವರು ತಮ್ಮ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರವನ್ನು ತರುವಂತೆ ತಿಳಿಸಿದ್ದಾರೆ. ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.11 ರಂದು ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಳ್ಳಲಿದೆ.

ಹೆಚ್ಚಿನ ಮಾಹಿತಿಗಾಗಿ 9449952008, 9740404520, 9483835674 ಸಂಪರ್ಕಿಸಬಹುದಾಗಿದೆ.