ಮಡಿಕೇರಿ, ಸೆ. 20 : ಜಿಲ್ಲೆಯ ಶಾಸಕರುಗಳ ನಿಯೋಗ ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರನ್ನು ಭೇಟಿಯಾಗಿ ಅತಿವೃಷ್ಟಿ ಹಾನಿಯ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸಿದರು.ನಿಯೋಗದಲ್ಲಿದ್ದ ಹುಣಸೂರು ಶಾಸಕ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.ಕೊಡಗಿನ ಸಂತ್ರಸ್ತರ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಭರವಸೆ ನೀಡಿದ ಸಚಿವ ಸಾ.ರಾ.ಮಹೇಶ್ ಪ್ರಾಧಿಕಾರ ರಚನೆಯ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯುವದಾಗಿ ಹೇಳಿದರು.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾಅಚ್ಚಯ್ಯ, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯರುಗಳಾದ ಚುಮ್ಮಿದೇವಯ್ಯ, ಸಂಗೀತ ಪ್ರಸನ್ನ, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾóಕ್ ಮತ್ತಿತರರು ಹಾಜರಿದ್ದು, ಮಹಾಮಳೆ ಹಾನಿ ಮತ್ತು ದಸರಾ ಆಚರಣೆ ಕುರಿತು ಸಮಾಲೋಚಿಸಿದರು.