ಕೂಡಿಗೆ, ಸೆ. 21: ಕೂಡಿಗೆ-ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷೆ ಅಲುಮೇಲಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

2017-18ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯನ್ನು ಮಂಡಿಸಿ, 2018-19ನೇ ಸಾಲಿನ ಅಂದಾಜು ಮುಂಗಡ ಪತ್ರವನ್ನು ಮಂಜೂರು ಮಾಡಲಾಯಿತು.

ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕ ಕೆ.ಟಿ. ಅರುಣ್‍ಕುಮಾರ್ ಮತ್ತು ಹಾಸನ ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಹೆಚ್.ಎ. ಪ್ರಕಾಶ್ ಅವರು ಮಾತನಾಡಿದರು. ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಬಹುಮಾನ ವಿತರಿಸಿದರು.

ಇದೇ ಸಂದರ್ಭ ಸಂಘದ ವತಿಯಿಂದ ಹಾಸನ ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಹೆಚ್.ಎ. ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯದರ್ಶಿ ಸುಮ ವರದಿ ವಾಚಿಸಿದರು. ಸಂಘದ ಉಪಾಧ್ಯಕ್ಷೆ ಗೌರಮ್ಮ ಸೇರಿದಂತೆ ನಿರ್ದೇಶಕರು ಇದ್ದರು.