ಸೋಮವಾರಪೇಟೆ,ಡಿ.3: ಸಮಾಜ ಕಲ್ಯಾಣ ಇಲಾಖೆ ಮತ್ತು ಸಂಸದರ ನಿಧಿಯಡಿ ಸಮೀಪದ ಶಾಂತಳ್ಳಿ ಹೋಬಳಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ರೂ. 55 ಲಕ್ಷ ವೆಚ್ಚದ ಅಂಬೇಡ್ಕರ್ ಭವನ ಕಾಮಗಾರಿಗೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು.

ಕಳೆದ ಸಾಲಿನಲ್ಲಿ ಬಿಜೆಪಿ ಸರ್ಕಾರವಿದ್ದ ಸಂದರ್ಭ ಹೋಬಳಿ ವ್ಯಾಪ್ತಿಯ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 25 ಲಕ್ಷ ಅನುದಾನ ಮೀಸಲಿಟ್ಟಿದ್ದು, ಇದೀಗ ಹೆಚ್ಚುವರಿ 25 ಲಕ್ಷ ಸೇರಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ರೂ. 50ಲಕ್ಷ ಬಿಡುಗಡೆಯಾಗಿದೆ. ಇದರೊಂದಿಗೆ ಸಂಸದರ ನಿಧಿಯಡಿ ರೂ. 5 ಲಕ್ಷ ಅನುದಾನ ಒದಗಿಸಿದ್ದು, ಕಾಮಗಾರಿ ನಡೆಯುವ ಸಂದರ್ಭ ಸಾರ್ವಜನಿಕರು ಗುಣಮಟ್ಟದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯ ಧರ್ಮಪ್ಪ, ಗ್ರಾ.ಪಂ. ಸದಸ್ಯೆ ಕುಸುಮ ನಾರಾಯಣ, ವಿಎಸ್‍ಎಸ್‍ಎನ್ ಅಧ್ಯಕ್ಷ ಕುಂದಳ್ಳಿ ದಿನೇಶ್, ಗ್ರಾಮದ ಪ್ರಮುಖರಾದ ಎಸ್.ಎ. ಪ್ರತಾಪ್, ಮಂಜುನಾಥ್, ಮಧು, ಗಿರೀಶ್, ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.