ಹೆಬ್ಬಾಲೆ, ಡಿ. 3: ಜಿಲ್ಲೆಯ ಗಡಿಗ್ರಾಮ ಅರೆಮಲೆನಾಡು ಪ್ರದೇಶವಾದ ಹೆಬ್ಬಾಲೆ ಗ್ರಾಮದಲ್ಲಿ ತಾ.7 ರಂದು ಗ್ರಾಮ ಶಕ್ತಿ ಸ್ವರೂಪಿಣಿ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಹಬ್ಬ ಹಾಗೂ ಜಾತ್ರೋತ್ಸವವು ಸಹಸ್ರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಸ್ವಸ್ತಿ ಶ್ರೀಮದ್ ವಿಜಯಾಭ್ಯುದಯ ಶಾಲಿವಾಹನ ಶಕ 1940ಕ್ಕೆ ಸಲ್ಲುವ ವಿಳಂಬ ನಾಮ ಸಂವತ್ಸರ ದಕ್ಷಿಣಾಯನೇ ಶರದೃತು ಕಾರ್ತಿಕ ಮಾಸ ಕೃಷ್ಣ ಪಕ್ಷ ಅಮಾವಸ್ಯೆ ತಾ.7 ರಂದು ರಾತ್ರಿ ದೇವಿಯ ಪೂಜೆ ನೆರವೇರಲಿದೆ.

ಪ್ರತಿವರ್ಷದಂತೆ ಅಮ್ಮನವರ ಸನ್ನಿಧಿಯಲ್ಲಿ ಬೆಳಿಗ್ಗೆ 7 ಘಂಟೆಗೆ ಗಣಪತಿ ಪೂಜೆ, ಪುಣ್ಯಾಹಃ ರಕ್ಷಾಬಂಧನ ಧ್ವಜಾರೋಹಣ ನವಗ್ರಹ ಸ್ಥಾಪನೆ, ನವಗ್ರಹ ಪೂಜೆ ಮಹಾ ಮಂಗಳಾರತಿ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ದೇವಾಲಯದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನೇತೃತ್ವದಲ್ಲಿ ನಡೆಯಲಿವೆ.

ಅಂದು ಗ್ರಾಮದಲ್ಲಿ ದೇವಿಯ ವಾರ್ಷಿಕ ಹಬ್ಬದ ಅಂಗವಾಗಿ ಪವಿತ್ರ ಬನದಲ್ಲಿ ಬನಶಂಕರಿ ದೇವಸ್ಥಾನದಲ್ಲಿ ಬೆಳಿಗ್ಗೆ ಕಳಶ ಸ್ಥಾಪಿಸುವದರೊಂದಿಗೆ ವಿವಿಧ ಪೂಜಾ ಕೈಂಕರ್ಯಗಳು ದೇವಸ್ಥಾನ ಸಮಿತಿ ಅಧ್ಯಕ್ಷ ಯಜಮಾನ್ ಎಚ್.ಎನ್. ಬಸವರಾಜು ಮತ್ತು ಕಾರ್ಯದರ್ಶಿ ಎಚ್.ಪಿ.ರಾಜು ನೇತೃತ್ವದಲ್ಲಿ ನಡೆಯಲಿವೆ.

ಸಂಜೆ 4 ಗಂಟೆಗೆ ಕ್ಷೀರಾಭಿಷೇಕ, ಗಣಪತಿ ಪೂಜೆ ನಂತರ ದೇವಿಯನ್ನು ಅಲಂಕರಿಸಲಾಗುತ್ತದೆ. ರಾತ್ರಿ 8 ಗಂಟೆಗೆ ಬನದಲ್ಲಿ ಅಗ್ನಿಕುಂಡ ಸ್ಥಾಪಿಸಲಾಗುತ್ತದೆ ಹರಕೆ ಹೊತ್ತ ಭಕ್ತಾದಿಗಳು ಅಗ್ನಿಕುಂಡ ತುಳಿದು ದೇವಿ ದರ್ಶನ ಪಡೆದು ಪೂಜೆ ಸಲ್ಲಿಸುತ್ತಾರೆ. ಹಬ್ಬದ ಅಂಗವಾಗಿ ಗ್ರಾಮವನ್ನು ಹಸಿರು ತಳಿರು ತೋರಣಗಳಿಂದ ಹಾಗೂ ದೇವಸ್ಥಾನಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗುತ್ತದೆ.

ನಂತರ ರಾತ್ರಿ 8 ಗಂಟೆ ವೇಳೆಗೆ ಶ್ರೀ ಬನಶಂಕರಿ ಮತ್ತು ಬಸವೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಬಳಿಯಿಂದ ವಿದ್ಯುತ್ ಅಲಂಕೃತ ಮಂಟಪದಲ್ಲಿ ಬನಶಶಂಕರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ನಂತರ ಉತ್ಸವವನ್ನು ಮೆರವಣಿಗೆ ಮೂಲಕ ಪವಿತ್ರ ಬನಕ್ಕೆ ಕೊಂಡೊಯ್ಯಲಾಗುತ್ತದೆ. ಹರಕೆ ಹೊತ್ತ ಭಕ್ತಾಧಿಗಳು 9 ದಿವಸ ಉಪವಾಸ ವ್ರತ ಆಚರಿಸಿ ಅಂದು ಉತ್ಸವಗಳೊಂದಿಗೆ ಮೆರವಣಿಗೆಯಲ್ಲಿ ತಾಯಿಯ ಬನಕ್ಕೆ ಬಂದು ದೇವಸ್ಥಾನದ ಮುಂದೆ ಹಾಕಿರುವ ಅಗ್ನಿಕುಂಡವನ್ನು ಹಾಯ್ದು ದೇವಿಯ ದರ್ಶನ ಪಡೆಯುವರು.

ದೇವಿಯ ಉತ್ಸವದೊಂದಿಗೆ ಗ್ರಾಮದ ಇತರೆ ಭಾಗಗಳಿಂದ ಹೊರಟ ಉತ್ಸವ ಮಂಟಪಗಳ ಶೋಭಾಯಾತ್ರೆಯು ಹಬ್ಬಕ್ಕೆ ಮೆರಗು ನೀಡುತ್ತವೆ.

ಮೆರವಣಿಗೆ ಸಂದರ್ಭ ಗ್ರಾಮದ ಬಸ್ ನಿಲ್ದಾಣದ ಬಳಿ ಸಿಡಿಸುವ ಬಣ್ಣ ಬಣ್ಣದ ಆಕರ್ಷಕ ಮದ್ದುಗುಂಡುಗಳ ಪ್ರದರ್ಶನ ಹಾಗೂ ಬಾಣ ಬಿರುಸುಗಳ ಚಿತ್ತಾರ ನೋಡುಗರ ಕಣ್ಮನ ಸೆಳೆಯುತ್ತದೆ. ಈ ಹಬ್ಬಕ್ಕೆ ದೇಶ ವಿದೇಶದಲ್ಲಿ ನೆಲಸಿರುವ ಗ್ರಾಮಸ್ಥರು, ಮೈಸೂರು, ಹಾಸನ ಜಿಲ್ಲೆಗಳ ಗಡಿಭಾಗದ ಜನರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರೂ ಮಂದಿ ಪಾಲ್ಗೊಳ್ಳುವರು.

ಜಾನಪದ ಕ್ರೀಡಾಕೂಟ : ಮಾದರಿ ಯುವಕ ಸಂಘದ ಆಶ್ರಯದಲ್ಲಿ ಜಾತ್ರೆಯ ಅಂಗವಾಗಿ ತಾ.8 ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಗ್ರಾಮೀಣ ಜಾನಪದ ಕ್ರೀಡೆಯಾದ ಎತ್ತಿನ ಗಾಡಿ ಓಟ ಸ್ಪರ್ಧೆ ಹಾಗೂ ಗ್ರಾಮೀಣ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ. ಎತ್ತಿನಗಾಡಿ ಓಟ ಪ್ರಥಮ ಬಹುಮಾನ 8 ಗ್ರಾಂ ಚಿನ್ನ, ದ್ವಿತೀಯ ಬಹುಮಾನ 5 ಗ್ರಾಂ ಚಿನ್ನ ಹಾಗೂ ತೃತೀಯ ಸಮಾದಾನಕರ ಬಹುಮಾನ ನೀಡಲಾಗುತ್ತದೆ.

ರಾಜ್ಯಮಟ್ಟದ ಕಬ್ಬಡಿ, ವಾಲಿಬಾಲ್ ಪಂದ್ಯಾವಳಿ ತಾ.5 ರಿಂದ 7ರ ವರೆಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ಪುರುಷರ ವಾಲಿಬಾಲ್, ಕಬ್ಬಡಿ ಹಾಗೂ ಮಹಿಳೆಯರ ಜಿಲ್ಲಾಮಟ್ಟದ ಥ್ರೋಬಾಲ್ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಎಚ್.ಆರ್.ಆದರ್ಶ ಅಧ್ಯಕ್ಷ( 9113897120), ಎಚ್.ಟಿ.ಸಂತೋಷ್ ಕಾರ್ಯದರ್ಶಿ(9743571397), ಎಚ್.ಜೆ.ಶ್ರೀಧರ್ ಸಂಘಟನ ಕಾರ್ಯದರ್ಶಿ(96711542248) ಸಂಪರ್ಕಿಸಲು ಕೋರಲಾಗಿದೆ. ಡಿ.8 ರಂದು ಶನಿವಾರ ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ.