ಮಡಿಕೇರಿ, ಡಿ. 4: ಮದೆ ಮಹೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ-ಪೋಷಕರ ಸಭೆ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಆಡಳಿತ ಮಂಡಳಿ ಅಧ್ಯಕ್ಷ ಹುದೇರಿ ಬಿ. ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳು ದುರಭ್ಯಾಸವನ್ನು ಬಿಟ್ಟು ಜ್ಞಾನಾರ್ಜನೆಯಲ್ಲಿ ತೊಡಗಬೇಕೆಂದು ಕರೆ ನೀಡಿದರು.ಅದೇ ರೀತಿ ದುರ್ಜನರ ಸಹವಾಸವನ್ನು ತ್ಯಜಿಸಬೇಕು, ಉತ್ತಮ ವಿದ್ಯಾಭ್ಯಾಸವನ್ನು ಪಡೆದು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಗುಲಾಬಿ ಜನಾರ್ದನ್ ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ಶಿಸ್ತನ್ನು ರೂಢಿಸಿ ಕೊಳ್ಳಬೇಕೆಂದು ಕರೆ ನೀಡಿದರು.

ಇದೇ ಸಂದರ್ಭ ಕಾಲೇಜಿನಲ್ಲಿ ನಡೆಸಿದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕ ಬಿ. ಸಿದ್ದರಾಜು ಸ್ವಾಗತಿಸಿದರು. ಪರಶುರಾಮಪ್ಪ ನಿರೂಪಿಸಿ, ಎನ್.ಎಸ್. ವಾಣಿ ವಂದಿಸಿದರು.