ಮಡಿಕೇರಿ, ಜ.31 : ಲೋಕಸಭಾ ಚುನಾವಣೆಯ ಅಧಿಸೂಚನೆಯು ಮಾರ್ಚ್ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದ್ದು, ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕಿದೆ. ಆದ್ದರಿಂದ ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳ ಬಗ್ಗೆ ಮಾಹಿತಿಯನ್ನು ತಾ. 5 ರೊಳಗೆ ಒದಗಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳಿಗೆ ಗುರುವಾರ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಸಂಬಂಧ ಆರಂಭದಿಂದ ಕೊನೆಯ ತನಕ ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿನದ್ದಾಗಿದೆ. ಆದ್ದರಿಂದ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಮನ್ವಯತೆ ಯಿಂದ ಕಾರ್ಯ ನಿರ್ವಹಿಸಬೇಕು. ಜೊತೆಗೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸೆಕ್ಟರ್ ಅಧಿಕಾರಿಗಳು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ವೀಕ್ಷಣೆಗೆ ತೆರಳುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಜೊತೆ ಗಿದ್ದು ವರದಿ ನೀಡುವಂತೆ ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀ ನಿವಾಸ್ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆ ಕಳೆದು ಕೊಂಡ ವರು, ಸ್ಥಳಾಂತರ ವಾಗಿರುವವರ ಬಗ್ಗೆ ಪ್ರತಿ ಬೂತ್‍ಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಬೇಕು ಎಂದು ನಿರ್ದೇಶನ ನೀಡಿದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಮತಗಟ್ಟೆ ವ್ಯಾಪ್ತಿಯಲ್ಲಿ ದೂರವಾಣಿ ಸಂಪರ್ಕ ಇದೆಯೇ? ಇಲ್ಲವೇ ಎಂಬ ಬಗ್ಗೆ ಮಾಹಿತಿ ಒದಗಿಸಬೇಕು. ಚುನಾವಣೆ ಸಂಬಂಧ ಕಾಲ ಕಾಲಕ್ಕೆ ಅಗತ್ಯ ಮಾಹಿತಿ ನೀಡುವಂತೆ ಸೆಕ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚುನಾವಣಾ ತರಬೇತಿದಾರ ಷಂಶುದ್ಧೀನ್ ಅವರು ಮತಗಟ್ಟೆ ಕೇಂದ್ರಗಳಲ್ಲಿ ರ್ಯಾಂಪ್ ಇರಬೇಕು. ಕುಡಿಯುವ ನೀರು, ಅಗತ್ಯ ಪೀಠೋಪಕರಣ, ರಸ್ತೆ ಸಂಪರ್ಕ, ಶೌಚಾಲಯ, ಗಾಳಿ ಬೆಳಕು ವ್ಯವಸ್ಥೆ, ಕಟ್ಟಡ ಸುಸ್ಥಿತಿಯಲ್ಲಿದೆಯೇ ಮತ್ತಿತ್ತರ ಮೂಲ ಸೌಲಭ್ಯಗಳು ಇವೆಯೇ ಎಂಬದರ ಬಗ್ಗೆ ಪರಿಶೀಲಿಸಿ, ವರದಿ ನೀಡುವಂತೆ ಅವರು ತಿಳಿಸಿದರು. ಸೆಕ್ಟರ್ ಅಧಿಕಾರಿಗಳು ಚುನಾವಣೆ ಸಂಬಂಧ ಅಗತ್ಯ ಮಾಹಿತಿ ಪಡೆದರು.