*ಗೋಣಿಕೊಪ್ಪಲು, ಏ. 27: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ತಮ್ಮ ವಿಕೃತ ಮನಸ್ಸು ಮೆರೆದ ಘಟನೆ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಗೋಣಿಕೊಪ್ಪ ಸಮೀಪದ ಅರುವತ್ತೋಕ್ಲು ಗ್ರಾ.ಪಂ. ವ್ಯಾಪ್ತಿಯ ಮೈಸೂರಮ್ಮ ನಗರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಅನ್ವರ್ ಎಂಬವರ ದ್ವಿಚಕ್ರ ವಾಹನವಾದ ಅಕ್ಟಿವ್ ಹೋಂಡಾ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಕರಕಲಾಗಿದೆ.

ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಯ ಮುಂಭಾಗದಲ್ಲಿ ಸ್ಕೂಟರ್‍ನ್ನು ನಿಲ್ಲಿಸಿದ್ದರು. ರಾತ್ರಿ ಸುಮಾರು 12 ಗಂಟೆಯ ಸಮಯದಲ್ಲಿ ಸ್ಕೂಟರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ದಗದಗನೆ ಉರಿಯುತ್ತಿದ್ದ ಬೆಂಕಿಯನ್ನು ಕಂಡು ಸಮೀಪದ ಮನೆಗಳು ಅನ್ವರ್‍ಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಸ್ಕೂಟರ್ ಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.