ಸೋಮವಾರಪೇಟೆ, ಮೇ 2: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ತೋಳೂರುಶೆಟ್ಟಳ್ಳಿ ಗ್ರಾಮದ ಅನಿಲ್ ಪೊನ್ನಪ್ಪ ಅವರ ತೋಟದಲ್ಲಿ ರೈಟರ್ ಕೆಲಸ ಮಾಡುತ್ತಿರುವ ಮೂಲತಃ ಕುಂಬೂರು ನಿವಾಸಿ ಅರ್ಜುನ್ (ಲಾಲು) ಮತ್ತು ರತಿ ಅವರ ಪುತ್ರ, ಸಾಂದೀಪನಿ ಶಾಲೆಯ ವಿದ್ಯಾರ್ಥಿ ಭುವನ್ (16) ಎಂಬಾತನೇ ನೇಣಿಗೆ ಶರಣಾದವನಾಗಿದ್ದು, ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಖಾಸಗಿಯಾಗಿ ಎದುರಿಸಿದ್ದ.

ಪರೀಕ್ಷೆಯಲ್ಲಿ 2 ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದರಿಂದ ತೀವ್ರವಾಗಿ ಮನನೊಂದಿದ್ದ ಭುವನ್ ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಅವರು ತೆರಳಿ ಪರಿಶೀಲನೆ ನಡೆಸಿದ್ದಾರೆ.