ಮಡಿಕೇರಿ, ಜು.11 : ಪ್ರತಿಯೊಬ್ಬರ ಜೀವನ ಮಟ್ಟ ಸುಧಾರಿಸುವಂತಾಗಲು ಮತ್ತು ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಜನಸಂಖ್ಯಾ ಸ್ಪೋಟ ತಡೆಯುವದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಬೋಧಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಆಸ್ಪತ್ರೆ, ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳು, ರೋಟರಿ ಕ್ಲಬ್ ಮತ್ತು ನೆಹರು ಯುವಕ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾ ಕೇತ್ರದಲ್ಲಿ ಗುರುವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ಶಿಕ್ಷಣ ಆರೋಗ್ಯ, ಆಹಾರ, ವಸತಿ, ಉದ್ಯೋಗ ಮತ್ತಿತರ ಮೂಲ ಸೌಲಭ್ಯ ದೊರೆಯುವಂತಾಗಲೂ ಜನಸಂಖ್ಯೆ ನಿಯಂತ್ರಣ ಅಗತ್ಯ ಎಂದು ಅವರು ಪ್ರತಿಪಾದಿಸಿದರು. ಜನಸಂಖ್ಯೆ ನಿಯಂತ್ರಿಸಿ ರಾಷ್ಟ್ರದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸು ವಂತಾಗಬೇಕು ಎಂದು ಸಲಹೆ ಮಾಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಸಿ. ದಯಾನಂದ ಮಾತನಾಡಿ ಮಾನವ ಸಂಪನ್ಮೂಲ ಒಂದು ರೀತಿ ವರವಾಗಿದೆ. ಆದರೆ ಭಾರತ ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಜನಸಂಖ್ಯೆ ವರವಾಗಿಲ್ಲ ಬದಲಾಗಿ ಮಾರಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಆರ್ಥಿಕವಾಗಿ ಹಿಂದುಳಿದ ರಾಷ್ಟ್ರಗಳಲ್ಲಿ ಜನಸಂಖ್ಯಾ ಸ್ಪೋಟ ಕಾಣಬಹುದು. ಜನಸಂಖ್ಯೆ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವದು, ಲಿಂಗ ತಾರತಮ್ಯ ಹೋಗಲಾಡಿಸುವದು, ಮಾನವ ಹಕ್ಕುಗಳ ರಕ್ಷಣೆ ಮಾಡುವದು ಮತ್ತಿತರ ಕಾರ್ಯಕ್ರಮ ಜಾರಿಗೊಳಿಸುವದು ಅತ್ಯಗತ್ಯ ಎಂದು ಹೇಳಿದರು.

ಜೊತೆಗೆ ಜನಸಂಖ್ಯೆ ನಿಯಂತ್ರಿಸಲು ಶಸ್ತ್ರಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡುವದು. ಕುಟುಂಬಗಳಿಗೆ ಪ್ರೋತ್ಸಾಹದಾಯಕ ಕಾರ್ಯಕ್ರಮ ಕಲ್ಪಿಸುವದು, ಕುಟುಂಬಗಳಲ್ಲಿನ ಮಕ್ಕಳಲ್ಲಿ ವಿಶ್ವಾಸ ಬೆಳೆಸುವದು, ಮತ್ತಿತ್ತರ ಕಾರ್ಯಕ್ರಮ ಜಾರಿಗೊಳಿಸಬೇಕಿದೆ ಎಂದು ಸಲಹೆ ಮಾಡಿದರು.

ಜನಸಂಖ್ಯೆ ಹೆಚ್ಚಳವಾದಷ್ಟು ಸಮಾಜಘಾತುಕ ಚಟುವಟಿಕೆಗಳು ಅಧಿಕವಾಗುತ್ತದೆ. ಜನಸಂಖ್ಯೆ ಸ್ಥಿರೀಕರಣ ಬಗ್ಗೆ ಗಮನ ಅರಿಸುವದು ಅತ್ಯಗತ್ಯ ಎಂದು ಅವರು ಹೇಳಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆನಂದ್ ಅವರು ಮಾತನಾಡಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು 1989 ಜುಲೈ 11 ರಂದು ವಿಶ್ವದ ಜನಸಂಖ್ಯೆ 500 ಕೋಟಿ ತಲುಪಿದ ಕಾರಣ ಜನಸಂಖ್ಯಾ ಸ್ಪೋಟದಿಂದ ಅಗುವ ಆರ್ಥಿಕ, ಸಾಮಾಜಿಕ ದುಷ್ಪರಿಣಾಮಗಳ ಕುರಿತಾಗಿ ಯುವಜನರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜುಲೈ 11 ರಂದು ಜನಸಂಖ್ಯೆ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ. ಮೋಹನ್ ಮಾತನಾಡಿ ಜನಸಂಖ್ಯೆ ನಿಯಂತ್ರಣ ಸಂಬಂಧಿಸಿದಂತೆ ಕುಟುಂಬ ಕಲ್ಯಾಣ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಸಿ.ಕಾರ್ಯಪ್ಪ ವಸ್ತು ಪ್ರದರ್ಶನ ಉದ್ಘಾಟಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಎಂ. ಶಿವಕುಮಾರ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಎಸ್. ಗೋಪಿನಾಥ್, ಸ್ತ್ರೀರೋಗ ತಜ್ಞೆ ಡಾ. ರಾಜೇಶ್ವರಿ ಇತರರು ಇದ್ದರು. ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ.ಎ.ಸಿ. ಶಿವಕುಮಾರ್ ಸ್ವಾಗತಿಸಿದರು, ಸುಮಿತ್ರ ಪ್ರಾರ್ಥಿಸಿದರು, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ರಮೇಶ್ ಅವರು ನಿರೂಪಿಸಿ, ವಂದಿಸಿದರು.