ಗೋಣಿಕೊಪ್ಪಲು, ಸೆ. 18: ವಾಣಿಜ್ಯ ನಗರದಲ್ಲಿರುವ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನವಾಗಿ ಆಂಬ್ಯುಲೆನ್ಸ್ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ನೂತನ ಆಂಬ್ಯುಲೆನ್ಸ್‍ನ ಕೀಯನ್ನು ಸ್ಥಳೀಯ ವೈದ್ಯಾಧಿಕಾರಿ ಡಾ. ಗ್ರೀಷ್ಮ ಅವರಿಗೆ ಹಸ್ತಾಂತರ ಮಾಡಿದರು.

ಇತ್ತೀಚೆಗೆ ಈ ಭಾಗಕ್ಕೆ ಆಂಬ್ಯುಲೆನ್ಸ್ ಬೇಕೆಂದು ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ. ಬೋಪಣ್ಣ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಿದ್ದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ, ಚನ್ನಯ್ಯನಕೋಟೆ ಜಿ.ಪಂ. ಸದಸ್ಯೆ ಲೀಲಾವತಿ, ಪೊನ್ನಂಪೇಟೆ ಜಿ.ಪಂ. ಸದಸ್ಯೆ ಶ್ರೀಜಾ ಸಾಜಿ ಅಚ್ಚುತ್ತನ್, ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ. ಮೋಹನ್, ತಾಲೂಕು ವೈದ್ಯಾಧಿಕಾರಿಗಳಾದ ಡಾ. ಯತಿರಾಜ್ ಆಂಬ್ಯುಲೆನ್ಸ್ ಚಾಲಕರು ಹಾಜರಿದ್ದರು. - ಹೆಚ್.ಕೆ. ಜಗದೀಶ್