ಸುಂಟಿಕೊಪ್ಪ, ಸೆ. ೧೭: ಸುಂಟಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶ್ರೀ ಗೌರಿ ಗಣೇಶೋತ್ಸವದ ಅಂಗವಾಗಿ ಶಾಂತಿಸಭೆಯನ್ನು ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿ ಶ್ರೀಧರ್ ನೇತೃತ್ವದಲ್ಲಿ ನಡೆಸಲಾಯಿತು.

ಸರ್ವಧರ್ಮೀಯರ ಸೌಹಾರ್ದ ಸಭೆಯಲ್ಲಿ ಠಾಣಾಧಿಕಾರಿ ಶ್ರೀಧರ್ ಮಾತನಾಡಿ, ಶ್ರೀ ಗೌರಿ ಗಣೇಶೋತ್ಸವ ಆಚರಣೆಯ ಸಂದರ್ಭ ಗ್ರಾಮದಲ್ಲಿ ಶಾಂತಿಗೆ ಭಂಗ ಬಾರದಂತೆ ಎಲ್ಲಾ ಧರ್ಮೀಯರು ಸಹಕರಿಸಬೇಕು. ಶ್ರೀ ಗೌರಿ ಗಣೇಶೋತ್ಸವ ಆಚರಣಾ ಸಮಿತಿಯವರು ಸರಕಾರದ ಮಾರ್ಗಸೂಚಿ, ಕಾನೂನು ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಸೂಚಿಸಿದರು.

ಈ ಸಂದರ್ಭ ಸುಂಟಿಕೊಪ್ಪ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್.ಐ. ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳ ಮುಖಂಡರು ಹಾಜರಿದ್ದರು.