ಸುಂಟಿಕೊಪ್ಪ, ನ. ೨೦: ಕಂಬಿಬಾಣೆ ಸರಕಾರಿ ಪ್ರಾಥಮಿಕ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ತಾವು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಮತ್ತು ಸಮಾಜ ಸೇವಕ ಟಿ.ಕೆ. ಸಾಯಿಕುಮಾರ್ ಹೇಳಿದರು.

ಕಂಬಿಬಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ತಾವು ಕೊಡುಗೆಯಾಗಿ ನೀಡಿದ ಸಮವಸ್ತç ವಿತರಣೆ ಮಾಡಿ ಅವರು ಮಾತನಾಡಿದರು. ಮ್ಯಾಗಡೂರ್ ಶ್ರೀ ವಿಶ್ವನಾಥ ದೇವಸ್ಥಾನ ಆಡಳಿತ ಮಂಡಳಿಯವರು ಈ ಶಾಲೆಯನ್ನು ದತ್ತು ತೆಗೆದುಕೊಳ್ಳಲು ಮುಂದಾಗಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಿ ಸರಕಾರದೊಂದಿಗೆ ವ್ಯವಹರಿಸಲಾಗುವುದು ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ಮತ್ತು ಮ್ಯಾಗೂಡೂರ್ ಶ್ರೀ ವಿಶ್ವನಾಥ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ಸಿಮ್ಲಾ ಶ್ರೀನಿವಾಸ್ ಅವರು ಕಂಬಿಬಾಣೆ ಶಾಲೆಯಲ್ಲಿ ಕೇವಲ ೫೫ ಮಕ್ಕಳು ವ್ಯಾಸಾಂಗ ಮಾಡುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ಸುಂಟಿಕೊಪ್ಪ ಲಯನ್ಸ್ ಮಾಜಿ ಅಧ್ಯಕ್ಷ ಸ್ಥಳೀಯ ಕಾಫಿ ಬೆಳೆಗಾರ ಟಿ.ಕೆ. ರಾಜೀವ್ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಪರಿಹಾರ ಕಂಡುಕೊಳ್ಳುವಲ್ಲಿ ನಾವು ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಂಬಿಬಾಣೆ ಗ್ರಾ.ಪಂ. ಸದಸ್ಯ ಆರ್.ಆರ್. ಮೋಹನ್, ನಂಜರಾಯಪಟ್ಟಣ ಗ್ರಾ.ಪಂ. ಸದಸ್ಯ ಸುಮೇಶ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಚೈತ್ರ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ನಯನ ಸ್ವಾಗತಿಸಿ, ನಿರೂಪಿಸಿ, ಶಿಕ್ಷಕಿ ಲೋಕಮ್ಮ ವಂದಿಸಿದರು.

ಶಿಕ್ಷಕರ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತç ಕೊಡುಗೆ ನೀಡಿದ ಟಿ.ಕೆ. ಸಾಯಿಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸಾಯಿಕುಮಾರ್ ಅವರ ಪತ್ನಿ ವಿಜಯ, ಪುತ್ರ ವಿಶ್ವನಾಥ್, ಮ್ಯಾಗಡೂರ್ ವಿಶ್ವನಾಥ ದೇವಸ್ಥಾನದ ಕಾರ್ಯದರ್ಶಿ ರೂಪ ರಾಜೀವ್, ಕಮಲ ನೆಹರು ಮಹಿಳಾ ಸಮಾಜದ ಅಧ್ಯಕ್ಷೆ ಮೀನಾ, ಸೇರಿದಂತೆ ಮಕ್ಕಳ ಪೋಷಕರು, ಸಾರ್ವಜನಿಕರು ಶಾಲಾ ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಾಲಾ ಮಕ್ಕಳು ಪ್ರದರ್ಶಿಸಿದ ಕಂಸಾಳೆ ನೃತ್ಯ ಪ್ರೇಕ್ಷಕರನ್ನು ರೋಮಾಂಚನಗೊಳಿಸಿತಲ್ಲದೆ, ವೇದಿಕೆಯಲ್ಲಿದ್ದ ಗಣ್ಯರು ಎಲ್ಲಾ ಮಕ್ಕಳಿಗೂ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು.