ವೀರಾಜಪೇಟೆ, ನ. ೨೧: ವಿಜಯಪುರದ ಕಿತ್ತೂರು ಚೆನ್ನಮ್ಮ ನಗರದ ವಿಜಯಪುರ ಜಿಲ್ಲಾ ಕೇಂದ್ರ ಬ್ಯಾಂಕ್ ಆವರಣದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ವೀರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಕರ್ನಂಡ ರಘು ಸೋಮಯ್ಯ ಅವರಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

೨೫ ವರ್ಷಗಳ ಕಾಲ ಪಟ್ಟಣ ಸಹಕಾರ ಬ್ಯಾಂಕ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೈಸೂರು ಕಾಫಿ ಪ್ರೊಸೆಸಿಂಗ್ ಸೊಸೈಟಿಯಲ್ಲಿ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕರಾಗಿ, ಕೊಡಗು ಜಿಲ್ಲಾ ಗೃಹ ರಕ್ಷಕ ನಿರ್ಮಾಣ ಸಂಘದ ನಿರ್ದೇಶಕರಾಗಿ, ಕರ್ನಾಟಕ ರಾಜ್ಯ ಸಹಕಾರಿ ವಸತಿ ಮಹಾಮಂಡಲ ನಿಯಮಿತ ಬೆಂಗಳೂರು ಸೇರಿದಂತೆ ಇನ್ನು ಹಲವಾರು ಸಂಘ ಸಂಸ್ಥೆಗಳಲ್ಲಿ ನಿರ್ದೇಶಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವದಕ್ಕಾಗಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಈ ಸಂದರ್ಭದಲ್ಲಿ ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಸಚಿವ ಎಂ.ಬಿ. ಪಾಟೀಲ್, ಶಾಸಕ ಜಿ.ಟಿ. ದೇವೆಗೌಡ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.