ಸಿದ್ದಾಪುರ, ಮೇ ೧೧: ಕರಡಿಗೋಡು ರಸ್ತೆ ಕಾಮಗಾರಿಯು ಗುಣಮಟ್ಟದಿಂದ ಕೂಡಿದ್ದು, ಕಳಪೆ ಕಾಮಗಾರಿ ನಡೆದಿಲ್ಲವೆಂದು ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡದ ಅವರು, ಇತ್ತೀಚೆಗೆ ಕೆಲವರು ಕರಡಿಗೋಡು ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಪತ್ರಿಕಾ ಹೇಳಿಕೆ ನೀಡಿರುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು. ಕರಡಿಗೋಡು ಗ್ರಾಮದ ರಸ್ತೆಗಳು ಕಳೆದ ೨೦ ವರ್ಷಗಳಿಂದ ತೀವ್ರವಾಗಿ ಹದಗೆಟ್ಟಿದ್ದು, ಈ ರಸ್ತೆಯನ್ನು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪರಿಶೀಲಿಸಿದ ಶಾಸಕ ಎ.ಎಸ್. ಪೊನ್ನಣ್ಣ, ರಸ್ತೆ ಅಭಿವೃದ್ಧಿ ಪಡಿಸುವ ಬಗ್ಗೆ ಭರವಸೆಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ರೂ. ೩೦ ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಯು ನಡೆಯುತ್ತಿದೆ. ಕಾಮಗಾರಿಯು ಉತ್ತಮ ಗುಣಮಟ್ಟವನ್ನು ಹೊಂದಿದೆ. ಆದರೇ ಅಭಿವೃದ್ಧಿಯನ್ನು ಸಹಿಸಲಾರದ ಕೆಲವರು ರಸ್ತೆ ಕಳಪೆ ಕಾಮಗಾರಿಯಿಂದ ಕೂಡಿದೆ ಎಂದು ಆರೋಪಿಸಿರುವುದು ಖಂಡನೀಯ ಎಂದರು.

ಗೋಷ್ಠಿಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ಗೋಪಾಲ್, ಮಾಜಿ ಸದಸ್ಯ ಮಿಲನ್, ಕೆ.ಎಸ್. ಸುನಿಲ್ ಇದ್ದರು.