ಮಡಿಕೇರಿ, ಮೇ ೧೪: ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಮೊದಲು ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ಹಾಗೂ ಅದರ ಅಗತ್ಯತೆಯ ಬಗ್ಗೆ ತಿಳಿಸಿಕೊಟ್ಟರು.

ವಿದ್ಯಾರ್ಥಿನಿ ಹರ್ಷಿತ ರಕ್ತದಾನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸ್ವಯಂಪ್ರೇರಿತರಾಗಿ ರಕ್ತದಾನವನ್ನು ಮಾಡಿದರು. ಸುಮಾರು ೪೧ ಯೂನಿಟ್‌ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಯತೀಶ್ ವಿ.ಎ., ಕಾಲೇಜಿನ ಪ್ರಾಂಶುಪಾಲೆ ಡಾ. ರೇಖಾ ಚಿಣ್ಣಪ್ಪ, ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿಯಾದ ಕಲ್ಪನಾ ಸಾಮ್ರಾಟ್, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.