ಕುಶಾಲನಗರ, ಮೇ ೧೬: ಕುಶಾಲನಗರ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿಗಳ ಕೊರತೆ, ಠಾಣೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ, ಅಧಿಕಾರಿ ಸಿಬ್ಬಂದಿಗಳ ವಸತಿ ಗೃಹ ನಿರ್ಮಾಣ ಇತ್ಯಾದಿ ವಿಷಯಗಳ ಬಗ್ಗೆ ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರ ಗಮನಕ್ಕೆ ತರಲಾಯಿತು.

ಕುಶಾಲನಗರದಲ್ಲಿ ಕಾಂಗ್ರೆಸ್ ಪ್ರಮುಖರಾದ ಮಂಜುನಾಥ್ ಗುಂಡೂರಾವ್ ಅವರ ನಿವಾಸಕ್ಕೆ ಸಚಿವರು ಭೇಟಿ ನೀಡಿದ ಸಂದರ್ಭ ಮಡಿಕೇರಿ ಕ್ಷೇತ್ರ ಶಾಸಕ ಮಂತರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ ಪಿ ಶಶಿಧರ್ ಮತ್ತು ಪ್ರಮುಖರಾದ ಕೆ.ಪಿ. ಚಂದ್ರಕಲಾ ಸಚಿವರಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಈಗಾಗಲೇ ಪೊಲೀಸ್ ಸಿಬ್ಬಂದಿಗಳ ನೇಮಕ ಕಾರ್ಯ ನಡೆದಿದೆ, ತರಬೇತಿ ನಂತರ ಅಗತ್ಯವಿರುವ ಜಿಲ್ಲೆಗಳಲ್ಲಿ ನಿಯೋಜನೆ ಮಾಡಲಾಗುವುದು. ಉಳಿದಂತೆ ಚುನಾವಣಾ ನೀತಿ ಸಂಹಿತೆ ತೆರವಾದ ನಂತರ ಸಮಸ್ಯೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದು ಯೋಜನೆ ರೂಪಿಸಲಾಗುವುದು ಎಂದು ಸಚಿವರು ಹೇಳಿದರು.

ಈ ಸಂದರ್ಭ ಮಂಜುನಾಥ್ ಗುಂಡೂರಾವ್ ಮತ್ತು ಕೆ.ಪಿ. ಚಂದ್ರಕಲಾ ಅವರು ಕುಶಾಲನಗರ ಸಮೀಪದ ಕೂಡ್ಲೂರು ವ್ಯಾಪ್ತಿಯಲ್ಲಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಸುಮಾರು ೨.೫ ಎಕರೆ ಜಾಗವನ್ನು ರೇಷ್ಮೆ ಇಲಾಖೆಯಿಂದ ಪೊಲೀಸ್ ಇಲಾಖೆಗೆ ವರ್ಗಾಯಿಸುವ ಪ್ರಕ್ರಿಯೆ ಬಗ್ಗೆ ಸಚಿವರಿಗೆ ಮಾಹಿತಿ ಒದಗಿಸಿದರು. ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ ಏರಿದ್ದು, ಸಿಬ್ಬಂದಿಗಳ ಕೊರತೆಯೊಂದಿಗೆ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಾಣದ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ್‌ನಾಥ್, ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ, ಪ್ರಮುಖರಾದ ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್, ಪುರಸಭೆ ಸದಸ್ಯರು, ಪಕ್ಷದ ಪ್ರಮುಖರಿದ್ದರು.