ಬೆಂಗಳೂರು, ಮೇ ೨೮: ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, ೨೦೧೯-೨೦ರ ಸಾಲಿನಲ್ಲಿದ್ದ ಅರಣ್ಯ ಇಲಾಖೆಯ ರಾಜಸ್ವ ಸಂಗ್ರಹಣೆ ೨೬೩.೪೧ ಕೋಟಿಯಿಂದ ೨೦೨೩-೨೪ರ ಸಾಲಿನಲ್ಲಿ ೪೧೭.೮೪ ಕೋಟಿ ರೂ.ಗೆ ಹೆಚ್ಚಳವಾಗಿದೆ. ೨೦೨೩-೨೪ನೇ ಸಾಲಿನಲ್ಲಿ ಅಧಿಸೂಚಿತ ಕಾಯ್ದಿಟ್ಟ ಅರಣ್ಯ (ಸೆಕ್ಷನ್ ೧೭) ವ್ಯಾಪ್ತಿ ೩೩೯೫.೭೩ ಹೆಕ್ಟೇರ್ ಅಂದರೆ ಸುಮಾರು ೮೩೦೦ ಎಕರೆಯಷ್ಟು ಹೆಚ್ಚಳವಾಗಿದ್ದರೆ, ರಕ್ಷಿತ ಅರಣ್ಯ ಪ್ರದೇಶ (ಸೆಕ್ಷನ್ ೩೩) ೧೮೪.೫೨ ಹೆಕ್ಟೇರ್ ಅಂದರೆ ೪೫೬ ಎಕರೆ ಹೆಚ್ಚಳವಾಗಿದೆ ಎಂದರು.

೨೬೦೨ ಎಕರೆ ಅರಣ್ಯ ಒತ್ತುವರಿ ತೆರವು

ರಾಜ್ಯದಲ್ಲಿ ಸುಮಾರು ೨ ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ೩ ಎಕರೆಗಿಂತಲೂ ಕಡಿಮೆ ಭೂಮಿ ಮಾತ್ರ ಇರುವ ಬಡ ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಹಾಗೂ ೩ ಎಕರೆಗಿಂತಲೂ ಹೆಚ್ಚು ಅರಣ್ಯ ಒತ್ತುವರಿ ಮಾಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ೩೭೧ ಪ್ರಕರಣಗಳಲ್ಲಿ ಸುಮಾರು ೨೬೦೨.೩೦ ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ತೆರವು ಮಾಡಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು ೧೫೦೦ ಕೋಟಿ ರೂ. ಆಗುತ್ತದೆ ಎಂದರು.

ಕೋಲಾರದಲ್ಲಿ ಅತಿ ಹೆಚ್ಚು ಅಂದರೆ ೧೩೯೨.೪೧ ಎಕರೆ ಅರಣ್ಯ ಜಮೀನು ಒತ್ತುವರಿ ತೆರವು ಮಾಡಿಸಲಾಗಿದೆ. ಮಡಿಕೇರಿಯಲ್ಲಿ ೫ಎಕರೆ ೫೦ಗುಂಟೆ ತೆರವು ಮಾಡಲಾಗಿದೆ. ಬೆಂಗಳೂರಿನ ಕೊತ್ತನೂರಿನಲ್ಲಿ ೧೭ ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು ೫೦೦ ಕೋಟಿ ರೂ.ಗೂ ಅಧಿಕ ಎಂದು ತಿಳಿಸಿದರು.

೫ ಕೋಟಿ ಸಸಿ

ಕಳೆದ ವರ್ಷ ವಿಶ್ವ ಪರಿಸರ ದಿನದಂದು ಘೋಷಿಸಿದಂತೆ ೫ಕೋಟಿ ೪೦ಲಕ್ಷ ಸಸಿಗಳನ್ನು ರಾಜ್ಯದಾದ್ಯಂತ ನೆಡಲಾಗಿದ್ದು, ಇವುಗಳ ಪೈಕಿ ಎಷ್ಟು ಬದುಕುಳಿದಿವೆ ಎಂದು ತಿಳಿಯಲು ಆಡಿಟ್ ಮಾಡಿ ೩ ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಈ ಸಾಲಿನಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕಾಗಿ ಹೆಚ್ಚುವರಿಯಾಗಿ ೧೦೦ ಕೋಟಿ ರೂ. ಅನುದಾನ ನೀಡಲಾಗುತ್ತಿದೆ ಎಂದರು.

ಖಾಲಿ ಹುದ್ದೆಗಳ ಭರ್ತಿ

ಅರಣ್ಯಇಲಾಖೆಯಲ್ಲಿ ಸುಮಾರು ೬ ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಅರಣ್ಯ ವೀಕ್ಷಕರ ೩೧೦ ಹುದ್ದೆಗಳ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣವಾಗಿದ್ದು, ನೀತಿ ಸಂಹಿತೆ ತೆರವಾದ ಬಳಿಕ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇದರ ಜೊತೆಗೆ ೫೪೦ ಅರಣ್ಯ ರಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯ ಪೂರ್ವಾನುಮತಿಯ ಅವಶ್ಯಕತೆ ಇಲ್ಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ ೧೦ ವಲಯ ಅರಣ್ಯ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಶೀಘ್ರ ಲಿಖಿತ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.

ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಿಣಿದಾರರ ೧೪೩ ಹುದ್ದೆ, ೪೫ ದ್ವಿತೀಯ ದರ್ಜೆ ಸಹಾಯಕರು ಮತ್ತು ೧೮ ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ವೃಂದದ ಖಾಲಿ ಹುದ್ದೆಗಳ ನೇಮಕಾತಿಗೂ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂದು ಅರಣ್ಯ ಸಚಿವರು ವಿವರಿಸಿದರು.

ವನ್ಯಜೀವಿ ಆವಾಸಸ್ಥಾನ ಅಭಿವೃದ್ಧಿಗೆ ಕ್ರಮ

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವನ್ಯಜೀವಿಗಳ ಆವಾಸಸ್ಥಾನ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಲಾಂಟನಾ, ಸೆನ್ನಾ ಮೊದಲಾದ ಕಳೆಗಳನ್ನು ತೆಗೆಯುವುದು, ಹುಲ್ಲುಗಾವಲು ಅಭಿವೃದ್ಧಿ, ಜಲ ಮೂಲಗಳ ಅಭಿವೃದ್ಧಿಯೂ ಸೇರಿದೆ ಎಂದು ತಿಳಿಸಿದರು. ಮಾನವ-ವನ್ಯಜೀವಿ ಸಂಘರ್ಷ ತಡೆಯಲು ರೈಲ್ವೆ ಬ್ಯಾರಿಕೇಡ್, ಆನೆ ನಿರೋಧಕ ಕಂದಕ, ಸೌರ ತಂತಿಬೇಲಿ ಅಳವಡಿಕೆ ಕಾರ್ಯವನ್ನು ಆದ್ಯತೆಯ ಮೇಲೆ ನಿರ್ವಹಿಸಲಾಗುತ್ತಿದೆ. ಈವರೆಗೆ ೩೩೨.೬೨ ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಗುರಿಯನ್ನು ಪೂರ್ಣಗೊಳಿಸಲಾಗಿದೆ. ಪ್ರಸ್ತುತ ೧೦೧ ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ವಿವರ ನೀಡಿದರು.

ಆನೆ, ಚಿರತೆ ಕಾರ್ಯಪಡೆ

ತಾವು ಸಚಿವರಾದ ತರುವಾಯ ಹಾಲಿ ಇರುವ ೫ ಆನೆ ಕ್ಷಿಪ್ರ ಕಾರ್ಯಾಚರಣೆ ಪಡೆಗಳ ಜೊತೆಗೆ ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ ೨ ಕಾರ್ಯಪಡೆ ಹಾಗೂ ಬೆಂಗಳೂರಿಗೆ ಸಮರ್ಪಿತವಾಗಿ ಒಂದು ಚಿರತೆ ಕಾರ್ಯಪಡೆ ರಚನೆ ಮಾಡಿದ್ದಾಗಿಯೂ ತಿಳಿಸಿದರು.

ಹೆಚ್ಚುವರಿ ರೈಲ್ವೆ ಬ್ಯಾರಿಕೇಡ್

ಕಾಡಾನೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ ೩೨೪ ಕಿ.ಮೀ. ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಿಸುವ ಅಗತ್ಯವಿದ್ದು, ಇದಕ್ಕಾಗಿ ವಾರ್ಷಿಕ ೨೫೦ ಕೋಟಿ ರೂ. ಅನುದಾನದೊಂದಿಗೆ ಎರಡು ವರ್ಷದಲ್ಲಿ ೫೦೦ ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.