ಸಿದ್ದಾಪುರ, ಜೂ. ೮: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ತಾ.೧೦ ರಂದು ನೆಲ್ಯಹುದಿಕೇರಿ ಗ್ರಾ.ಪಂ. ಎದುರು ಪ್ರತಿಭಟನೆ ನಡೆಸಲಾಗುವುದೆಂದು ಸಿಪಿಐಎಂ ಪಕ್ಷದ ಮುಖಂಡ ಪಿ.ಆರ್. ಭರತ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ವ್ಯಾಪ್ತಿಯ ಸಾರ್ವಜನಿಕರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳ ಹಿಂಡು ಕಾಫಿ ತೋಟಗಳಲ್ಲಿ ಬೀಡುಬಿಟ್ಟ ಪರಿಣಾಮ ರೈತರ ಬೆಳೆಗಳು ನಾಶವಾಗುತ್ತಿದೆ. ಸ್ಥಳೀಯ ತೋಟ ಕಾರ್ಮಿಕರು ಕಾಡಾನೆಗಳ ಹಾವಳಿಗೆ ಹೆದರಿ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಅರಣ್ಯ ಇಲಾಖೆ ಶಾಶ್ವತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿನ ರಸ್ತೆಗಳು ಸಂಚಾರಕ್ಕೆ ಯೋಗ್ಯವಲ್ಲದಂತಾಗಿದೆ. ಬಹುತೇಕ ಕಾಂಕ್ರಿಟ್ ರಸ್ತೆಗಳ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಗಳಲ್ಲಿ ನೀರು ನಿಂತು ರಸ್ತೆ ಹದಗೆಟ್ಟಿದ್ದು ಕೂಡಲೇ ರಸ್ತೆ ಸಮಸ್ಯೆಯನ್ನು ಬಗೆಹರಿಸಬೇಕೆಂದು ಭರತ್ ಆಗ್ರಹಿಸಿದರು. ನೆಲ್ಯಹುದಿಕೇರಿ ಗ್ರಾಮ ವ್ಯಾಪ್ತಿಯಲ್ಲಿ ಗಿರಿಜನರಿಗಾಗಿ ಮೀಸಲಿಟ್ಟಿದ್ದ ನಾಲ್ಕು ಏಕರೆ ಜಾಗವನ್ನು ವ್ಯಕ್ತಿಯೋರ್ವರು ಒತ್ತುವರಿ ಮಾಡಿಕೊಂಡಿದ್ದು, ಕೂಡಲೇ ಒತ್ತುವರಿ ಜಾಗವನ್ನು ಬಿಡಿಸಿ ಗಿರಿಜನರಿಗೆ ನೀಡಬೇಕೆಂದರು. ಜಿಲ್ಲೆಯಲ್ಲಿ ಜೀತಪದ್ದತಿ ವಿವಿಧ ರೂಪದಲ್ಲಿ ಇಂದಿಗೂ ಜಾರಿಯಲ್ಲಿದೆ. ಇಂದಿಗೂ ಜಿಲ್ಲೆಯಲ್ಲಿ ಸಾಲದ ಹೊರೆಯಲ್ಲಿ ಜೀತದಾಳಾಗಿ ಬದುಕುತ್ತಾ, ಕಡಿಮೆ ವೇತನದಲ್ಲಿ ಕೆಲಸ ಮಾಡಿ ಬದುಕುತ್ತಿರುವ ಕುಟುಂಬಗಳಿವೆ. ಜೀತ ಪದ್ಧತಿಯೊಳಗಿರುವ ಕುಟುಂಬಗಳು ಸರಕಾರದ ಸೌಲಭ್ಯಗಳಿಂದ ವಂಚಿತರಾಗಿ ಪ್ರಾಣಿಗಳಿಗಿಂತಲೂ ಕಡೆಯಾಗಿ ಬದುಕುತ್ತಿದ್ದಾರೆ. ಈ ಹಿಂದೆ ಜೀತ ಪದ್ಧತಿಯ ವಿರುದ್ಧ ಉಪವಿಭಾಗಾಧಿಕಾರಿಗಳಿಗೆ ದೂರನ್ನು ನೀಡಬಹುದಾಗಿತ್ತು. ಆದರೆ ಇದೀಗ ಜೀತ ಪದ್ಧತಿಗೆ ಒಳಪಟ್ಟವರು ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಕಳುಹಿಸಬೇಕಾಗಿದೆ. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆAದು ಒತ್ತಾಯಿಸಿದರು. ೨೦೧೯ರ ಪ್ರಳಯದಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಾದವರಿಗೆ ಸರಕಾರ ಇದುವರೆಗೂ ಸೂರು ನೀಡುವತ್ತ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಈಗಾಗಲೇ ಜಿಲ್ಲಾಡಳಿತ ವಶಪಡಿಸಿಕೊಂಡ ೮.೨೨ ಏಕರೆ ಜಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ,ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು. ತಲಾ ೧೦ ಲಕ್ಷ ಹಣವನ್ನು ಮನೆ ನಿರ್ಮಿಸಲು ನೀಡಬೇಕೆಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಕಾರ್ಪೊರೇಟರುಗಳು ಒತ್ತುವರಿ ಮಾಡಿಕೊಂಡಿರುವ ಸರಕಾರಿ ಜಾಗವನ್ನು ಬಿಡಿಸಿ ನಿವೇಶನ ರಹಿತರಾಗಿ ತೋಟದಮನೆಯಲ್ಲಿ ವಾಸವಿರುವ ಕುಟುಂಬಗಳಿಗೆ ನೀಡಬೇಕೆಂದು ಮನವಿ ಮಾಡಿದರು. ಗ್ರಾಮದಲ್ಲಿ ನಿವೇಶನ ಹೊಂದಿರುವ ಬಡವರ್ಗದ ಜನರು ೯೪ಸಿ ಮುಖಾಂತರ ಹಕ್ಕು ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರೂ ಕೂಡ ಅರ್ಹತೆಯಿರುವ ಕುಟುಂಬಗಳಿಗೆ ಹಕ್ಕು ಪತ್ರ ಸಮರ್ಪಕವಾಗಿ ಹಂಚಿಕೆಯಾಗಿಲ್ಲ. ಕೂಡಲೇ ಗ್ರಾಮದಲ್ಲಿ ಹಕ್ಕು ಪತ್ರಕ್ಕೆ ಅರ್ಜಿ ಸಲ್ಲಿಸಿದ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಯಾಗಬೇಕೆಂದು ಒತ್ತಾಯಿಸಿದರು.

ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ತಾ.೧೦ ರಂದು ನೆಲ್ಯಹುದಿಕೇರಿ ಗ್ರಾ.ಪಂ. ಎದುರು ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದರು.

ಗೋಷ್ಠಿಯಲ್ಲಿ ಕೆ ಕೆ ಚಂದ್ರನ್, ಕೆ ಶಿವರಾಮನ್, ಯೂಸುಫ್, ಹಬೀಬ್, ಜೋಸ್, ಸೌಕತ್ ಆಲಿ ಹಾಜರಿದ್ದರು.