ಮಡಿಕೇರಿ, ಜೂ. ೧೨: ೧೪ ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಸರಕಾರ ಉಚಿತವಾದ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿ ನಿಲಯ ವ್ಯವಸ್ಥೆ ಇದ್ದು, ಇತ್ತೀಚಿನ ದಿನಗಳಲ್ಲಿ ಸರಕಾರಿ ವಸತಿ ಶಾಲೆಗಳು ಉತ್ತಮ ಹೆಸರು ಮಾಡುತ್ತಿದ್ದು, ಇಂತಹ ಅವಕಾಶಗಳನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿ.ಪಂ. ಸಿಇಓ ವರ್ಣಿತ್ ನೇಗಿ ಅವರು ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಮತ್ತು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರಕಾರದ ಜತೆ ಸರಕಾರೇತರ ಸಂಸ್ಥೆಗಳೂ ಕೈಜೋಡಿಸುವಂತೆ ಹೇಳಿದ ಅವರು ಹೀಗಾದಲ್ಲಿ ಇದನ್ನು ನಿರ್ಮೂಲನೆ ಮಾಡುಬಹುದೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ ೧೪ ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ದೂಡುವುದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ತೊಂದರೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಮಕ್ಕಳಲ್ಲಿ ಒಳ್ಳೆಯ ನಡವಳಿಕೆ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಲು, ಕಡ್ಡಾಯವಾಗಿ ಶಿಕ್ಷಣ ಕೊಡಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದರು.

ಬಡತನ, ಅಜ್ಞಾನದಿಂದ ಮಕ್ಕಳನ್ನು ಕೂಲಿಗೆ ದೂಡಬಾರದು, ಎಷ್ಟೇ ಬಡತನವಿದ್ದರೂ ಸಹ ಮಕ್ಕಳಿಗೆ ಶಿಕ್ಷಣ ನೀಡಬೇಕು. ಇದರಿಂದ ಸಮಾಜವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಅಧಿಕಾರಿ ಎಸ್.ಎಲ್.ಹರ್ಷವರ್ಧನ್ ಅವರು ಬಾಲ ಕಾರ್ಮಿಕ ವಿರೋಧಿ ದಿನದ ಪ್ರಯುಕ್ತ ಪ್ರಮಾಣ ವಚನ ಬೋಧಿಸಿ, ಸತ್ಯವಾಗಿ, ಪ್ರಾಮಾಣಿಕವಾಗಿ ಹಾಗೂ ಆತ್ಮಸಾಕ್ಷಿಯಾಗಿ ತಾವು ವಾಸಿಸುವ ಸುತ್ತಮುತ್ತಲಿನ ಪ್ರದೇಶ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡು ಬಂದಲ್ಲಿ ಮಾಲೀಕರು ಹಾಗೂ ಪೋಷಕರಿಗೆ ತಿಳುವಳಿಕೆ ನೀಡಿ ಮಕ್ಕಳನ್ನು ಶಾಲೆಗೆ ಸೇರಿಸಬೇಕೆಂದರು.

ರಾಷ್ಟçವು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯತ್ತ ಹೆಜ್ಜೆ ಹಾಕುತ್ತಿದ್ದು, ಆ ದಿಸೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕಾರ್ಯಗಳು ಆಗಬೇಕಿದೆ ಎಂದು ವಕೀಲ ಯಾಲದಾಳು ಮನೋಜ್ ಬೋಪಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

೧೪ ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಾಲೆಯಲ್ಲಿ ಓದಿಕೊಂಡು ತಮ್ಮ ಕುಟುಂಬದಲ್ಲಿ ಕೃಷಿ, ಮನೆ ಕೆಲಸಗಳನ್ನು ಮಾಡಿದರೆ ಬಾಲ ಕಾರ್ಮಿಕ ಪದ್ಧತಿ ಆಗುವುದಿಲ್ಲ. ಮಕ್ಕಳು ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳದಂತೆ ಗಮನಹರಿಸಬೇಕು. ಸ್ವಾತಂತ್ರö್ಯ ನಂತರ ರಾಜ್ಯ ನಿರ್ದೇಶಕ ತತ್ವಗಳಲ್ಲೂ ಸಹ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಹೇಳಲಾಗಿದೆ. ೧೯೮೬ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬAಧಿಸಿದAತೆ ವಿವರಿಸಲಾಗಿದೆ. ಹಾಗೆಯೇ ೨೦೧೬ ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ವಿರೋಧ ಕಾಯ್ದೆ ಜಾರಿಗೆ ಬಂದಿದೆ ಎಂದು ಮನೋಜ್ ಬೋಪಯ್ಯ ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ. ಜಯಲಕ್ಷಿö್ಮ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ್ ಕೆ.ನರ್ವಾಡೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎA.ಯತ್ನಟ್ಟಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್.ಶೀರಾಝ್ ಅಹ್ಮದ್ ಇತರರು ಇದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಬಿ.ಎಸ್.ಜಯಪ್ಪ ನಿರೂಪಿಸಿ, ವಂದಿಸಿದರು.