ಸೋಮವಾರಪೇಟೆ, ಜೂ. ೧೩: ಮೊಗೇರ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಮೊಗೇರ ಸೇವಾ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪಿ.ಕೆ. ಚಂದ್ರು ಅಭಿಪ್ರಾಯಿಸಿದರು.

ತಾಲೂಕು ಮೊಗೇರ ಸೇವಾ ಸಮಾಜದ ವತಿಯಿಂದ ಪಟ್ಟಣದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಮುದಾಯದ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.

ಮೊಗೇರ ಸಮಾಜ ಬಾಂಧವರು ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದರೆ ಮಾತ್ರ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದರು.

ಸAಘಟನೆಯ ಜಿಲ್ಲಾಧ್ಯಕ್ಷ ಜನಾರ್ಧನ್ ಮಾತನಾಡಿ, ಮೊಗೇರ ಸಮಾಜದ ವತಿಯಿಂದ ಸಮುದಾಯದ ಅಭಿವೃದ್ಧಿಗೆ ಹಲವಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಸಮುದಾಯದವರು ಸಂಘಟನೆಯಾದಲ್ಲಿ ಮಾತ್ರ ಎಲ್ಲಾ ರೀತಿಯ ಸವಲತ್ತು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘವನ್ನು ಇನ್ನಷ್ಟು ಬಲಪಡಿಸಬೇಕು. ಸರ್ಕಾರದ ಸವಲತ್ತುಗಳನ್ನು ಹೊಂದಿಕೊAಡು ತಮ್ಮ ಜೀವನಮಟ್ಟ ಸುಧಾರಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಿ.ಎಂ. ದಾಮೋದರ್, ಕಾರ್ಯದರ್ಶಿ ಹರೀಶ್, ತಾಲೂಕು ಅಧ್ಯಕ್ಷ ವಸಂತ್, ಕಾರ್ಯದರ್ಶಿ ಕೆ.ಕೆ. ಗಣೇಶ್, ಉಪಾಧ್ಯಕ್ಷ ಹರೀಶ್, ಖಜಾಂಚಿ ಜಯಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.