ಕುಶಾಲನಗರ, ಜು. ೧೧: ಕನ್ನಡೇತರ ನಾಮ ಫಲಕಗಳನ್ನು ತೆರವುಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಬಳಿ ಸೇರಿದ ವೇದಿಕೆಯ ಪ್ರಮುಖರು ಮತ್ತು ಕಾರ್ಯಕರ್ತರು ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಒತ್ತು ನೀಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸಂಸ್ಥೆಗಳು ಸೇರಿದಂತೆ ರಾಜ್ಯದಲ್ಲಿರುವ ವಿವಿಧ ವಾಣಿಜ್ಯ ಹಾಗೂ ಇತರ ಕಚೇರಿಗಳ ನಾಮಫಲಕಗಳ ಮೇಲ್ಭಾಗದಲ್ಲಿ ಶೇಕಡ ೬೦ ಭಾಗವನ್ನು ಕನ್ನಡಕ್ಕೆ ಮೀಸಲಿಡಬೇಕು ಈ ಬಗ್ಗೆ ರಾಜ್ಯ ಸರ್ಕಾರದ ಸ್ಪಷ್ಟ ಆದೇಶವಿದ್ದರೂ ಸಹ ಬಹುತೇಕ ವಾಣಿಜ್ಯ ಹಾಗೂ ಸರ್ಕಾರಿ ಕಚೇರಿಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷö್ಯ ಮಾಡುತ್ತಿರುವುದು ಕಂಡು ಬಂದಿದೆ. ಈ ನಿಟ್ಟಿನಲ್ಲಿ ತಕ್ಷಣ ಅಗತ್ಯ ಬದಲಾವಣೆಗೆ ಗಡುವು ನೀಡುವುದಾಗಿ ಎಚ್ಚರಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಮತ್ತು ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಡಿ. ಅಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಮೆರವಣಿಗೆ ಮೂಲಕ ಕುಶಾಲನಗರ ಪುರಸಭೆ ಕಚೇರಿ ಬಳಿ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜುಲೈ ೨೫ರ ಒಳಗೆ ಪಟ್ಟಣದಲ್ಲಿರುವ ವಾಣಿಜ್ಯ ಹಾಗೂ ಸರಕಾರಿ ಕಚೇರಿಗಳ ಕನ್ನಡೇತರ ನಾಮ ಫಲಕಗಳನ್ನು ತೆರವುಗೊಳಿಸದೆ ಇದ್ದಲ್ಲಿ ಪುರಸಭೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿ ದೀಪ ಪೂಜಾರಿ, ಸತೀಶ್ ಕುಮಾರ್, ತಾಲೂಕು ಉಪಾಧ್ಯಕ್ಷರುಗಳಾದ ಕೆ.ಎಸ್. ನಾಸೀರ್, ಕೆ. ಚಂದ್ರು, ಎಸ್.ಎಸ್. ಫಯಜುದ್ದೀನ್, ಪ್ರಧಾನ ಕಾರ್ಯದರ್ಶಿ ಎಂ.ಪಿ. ನವೀನ್, ಗೌರವಾಧ್ಯಕ್ಷ ವಿ.ಎಸ್. ರಾಜಶೇಖರ ಗೌಡ, ರೂಪ ಗಣೇಶ್ ಮತ್ತಿತರರು ಇದ್ದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ಕುಶಾಲನಗರ ಪುರಸಭೆ ವ್ಯಾಪ್ತಿಯ ನಾಮಫಲಕಗಳಲ್ಲಿ ಶೇ. ೬೦ರಷ್ಟು ಕನ್ನಡ ಬಳಕೆ ಮಾಡಲು ಸೂಚನೆ ನೀಡಲಾಗಿದೆ. ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಪುರಸಭೆ ಮೂಲಕ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪಟ್ಟಣ ವ್ಯಾಪ್ತಿಯಲ್ಲಿ ಶೇ. ೫೦ರಷ್ಟು ಸರಕಾರದ ಆದೇಶವನ್ನು ಪಾಲಿಸಿರುವುದು ಗಮನಕ್ಕೆ ಬಂದಿದೆ. ಕಂಪನಿ ಉದ್ದಿಮೆದಾರರು ಮಾತ್ರ ನಾಮಫಲಕ ಬದಲಿಸಲು ಕಾಲಾವಕಾಶ ಕೋರಿದ್ದಾರೆ ಎಂದು ಹೇಳಿದ ಅವರು, ಉದ್ದಿಮೆಗೆ ಪರವಾನಿಗೆ ನೀಡುವ ಅಥವಾ ನವೀಕರಿಸುವ ಸಂದರ್ಭ ನಾಮಫಲಕದ ಛಾಯಾಚಿತ್ರವನ್ನು ಪಡೆಯಲಾಗುತ್ತದೆ ಎಂದು ಹೇಳಿದರು. ಸ್ಥಳೀಯ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳ ಸಹಕಾರ ಕೂಡ ಈ ಸಂದರ್ಭ ಪಡೆಯಲಾಗುತ್ತಿದೆ ಎಂದು ಅವರು ಹೇಳಿದರು.