ಸೋಮವಾರಪೇಟೆ, ಆ. ೨೮: ಇಲ್ಲಿನ ವೀರಶೈವ ಲಿಂಗಾಯತ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮ ಸ್ಥಳೀಯ ವಿರಕ್ತ ಮಠದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಮಠಾಧೀಶರಾದ ಶ್ರೀ ನಿಶ್ಚಲ ನಿರಂಜನ ದೇಶೀಕೇಂದ್ರ ಸ್ವಾಮೀಜಿಗಳು, ಸಮಾಜದಲ್ಲಿ ಸಂಘಟನೆಯೊAದಿಗೆ ಸಾಮರಸ್ಯವೂ ಮುಖ್ಯ. ಈ ನಿಟ್ಟಿನಲ್ಲಿ ಸಂಘಟನೆಗಳು ಕಾರ್ಯನಿರ್ವಹಿಸಬೇಕು ಎಂದರು.

ವೀರಶೈವ ಲಿಂಗಾಯತ ಸಮಾಜಕ್ಕೆ ತನ್ನದೇ ಆದ ಇತಿಹಾಸ, ಆಚಾರ-ವಿಚಾರಗಳಿದ್ದು, ಅವುಗಳನ್ನು ಉಳಿಸಿ ಬೆಳೆಸುವುದರೊಂದಿಗೆ ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕಿದೆ. ಸಮಾಜ ಸಂಘಟಿತವಾದರೆ ಬಲಿಷ್ಠವಾಗುತ್ತದೆ. ಅದರಂತೆ ಸಾಮರಸ್ಯವಿದ್ದರೆ ಸೌಹಾರ್ದತೆ ನೆಲೆಸುತ್ತದೆ ಎಂದರು.

ವೀರಶೈವ ಲಿಂಗಾಯತ ಸಮಾಜದ ಆಸ್ತಿಪಾಸ್ತಿ ರಕ್ಷಣೆ, ಬಸವೇಶ್ವರ ಕಲ್ಯಾಣ ಮಂಟಪ ಹಾಗೂ ವಿರಕ್ತ ಮಠದ ಬಗ್ಗೆ ಮಹಾಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಸಮಾಜದ ಯಜಮಾನ ಶಿವಕುಮಾರ್ ಅವರು ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೆಟ್ರು ಮೃತ್ಯುಂಜಯ, ಕಾರ್ಯದರ್ಶಿ ನಾಗರಾಜ್ ಹಾಗು ಸಮಿತಿಯ ನಿರ್ದೇಶಕರುಗಳು ಉಪಸ್ಥಿತಿತರಿದ್ದರು.

ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ ೮೦ಕ್ಕಿಂತ ಹೆಚ್ಚಿನ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.