ಮಡಿಕೇರಿ, ಆ. ೨೮: ೨೦೨೪ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿAದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ೨೦೧೬ ರ ಜುಲೈ, ೨೦ ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ ೧೯೭೪ ರ ಪ್ರಕಾರ ಕಲಂ ೩೩(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐಪಿಸಿ ಸೆಕ್ಷನ್ ೧೮೬೦ ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ನಂತರ ಗೌರಿ ಗಣೇಶ ಮೂರ್ತಿಗಳನ್ನು ಅವರವರ ಮನೆಗಳಲ್ಲಿಯೇ ಅಥವಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವತಿಯಿಂದ ನಿಗದಿಪಡಿಸಲಾಗುವ ಸ್ಥಳಗಳಲ್ಲಿ ಮಾತ್ರವೇ ವಿಸರ್ಜಿಸುವುದು. ಗೌರಿ-ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಮತ್ತಿತರ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಿAದ ವ್ಯವಸ್ಥೆ ಮಾಡಿರುವ ಕಸ ಸಂಗ್ರಹಣ ವಾಹನಕ್ಕೆ ನೀಡುವುದು.

ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ) ನಿಯಮಗಳು ೨೦೦೦ ರ ನಿಬಂಧನೆಗಳನ್ನು ಗಣೇಶ ಪೆಂಡಾಲ್‌ಗಳಲ್ಲಿ ಅನುಸರಿಸತಕ್ಕದ್ದು. ಹಬ್ಬದ ಸಂದರ್ಭದಲ್ಲಿ ಪರಿಸರ ಸ್ನೇಹಿ ಹಸಿರು-ಪಟಾಕಿಗಳನ್ನು ಮಾತ್ರ ಉಪಯೋಗಿಸತಕ್ಕದ್ದು ಹಾಗೂ ರಾತ್ರಿ ೧೦ ಗಂಟೆಯಿAದ ಬೆಳಿಗ್ಗೆ ೬ ಗಂಟೆವರೆಗೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‌ಗಳನ್ನು ನಿರ್ಮಿಸುವಲ್ಲಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ತಿಳಿಸಿದೆ. ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು.

ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗುಗಳು(ಕಾಂಪಸ್ಟೇಬಲ್, ಬಯೋಡಿಗ್ರೇಡೇಬಲ್ ಮತ್ತು ನಾನ್ ವೋವನ್ ಸ್ಯಾಕ್ಸ್ ಇರೆಸ್ಪೆಕ್ಟಿವ್ ಆಫ್ ಸೈಜ್ ಮತ್ತು ಥಿಕ್‌ನೆಸ್) ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.