ಕೂಡಿಗೆ, ಸೆ. ೫: ಕೂಡಿಗೆ ಸೋಮವಾರಪೇಟೆ ಮುಖ್ಯ ರಸ್ತೆಯ ಯಡವನಾಡು ಮೀಸಲು ಅರಣ್ಯ ಪ್ರದೇಶದ ಸಮೀಪದಲ್ಲಿರುವ ಕುಡಿಯುವ ನೀರಿನ ಪಂಪ್‌ಹೌಸ್ ಬಳಿ ಯಡವನಾಡು ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಬಂದ ಗಂಡು ಜಿಂಕೆಯನ್ನು ಬೀದಿ ನಾಯಿಗಳ ಹಿಂಡು ದಾಳಿ ಮಾಡಿ ಕೊಂದಿರುವ ಘಟನೆ ನಡೆದಿದೆ.

ಸೋಮವಾರಪೇಟೆ ಪಶುವೈದ್ಯಾಧಿಕಾರಿ ಡಾ. ನಾಗರಾಜ್ ಜಿಂಕೆಯ ಮರಣೋತ್ತರ ಪರೀಕ್ಷೆ ನೆಡೆಸಿದರು. ನಂತರ ಯಡವನಾಡು ಮೀಸಲು ಅರಣ್ಯ ಪ್ರದೇಶದಲ್ಲಿ ಹೂಳಲಾಯಿತು.

ಈ ಸಂದರ್ಭ ಕುಶಾಲನಗರ ತಾಲೂಕು ಪಶುವೈದ್ಯಾಧಿಕಾರಿ ಡಾ. ಶಿಂಧೆ, ಸ್ಥಳೀಯ ಜನಪ್ರತಿನಿಧಿಗಳು, ಹುದುಗೂರು ಉಪ ವಲಯ ಅರಣ್ಯಾಧಿಕಾರಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.