ವೀರಾಜಪೇಟೆ, ಅ. ೯: ಸಂವಿಧಾನವನ್ನು ಓದಿ ಅರ್ಥೈಸಿ ಕೊಳ್ಳುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ನಾಗ ಮೋಹನ್‌ದಾಸ್ ಅಭಿಪ್ರಾಯಪಟ್ಟರು. ವೀರಾಜಪೇಟೆಯ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಮಾನವ ಹಕ್ಕುಗಳ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಸಹಯೋಗ ದಲ್ಲಿ ನಡೆದ ಭಾರತದ ಸಂವಿಧಾನದ ಮೂಲಂಶಗಳು ಎಂಬ ವಿಷಯದ ಕುರಿತು ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದರು. ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟçವಾಗಿದ್ದು, ಪ್ರಜಾಪ್ರಭುತ್ವಕ್ಕೆ ದೇಶದ ಸಂವಿಧಾನವು ತಳಹದಿಯಾಗಿದೆ ಎಂದ ಅವರು ಸಂವಿಧಾನವನ್ನು ಓದದಿದ್ದರೆ ಕಾನೂನನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕನ್ನು ನೀಡಿದ್ದು ಸಾಮಾಜಿಕ ನ್ಯಾಯದ ಅಂಶಗಳನ್ನು ಎತ್ತಿ ಹಿಡಿದಿದೆ. ಪ್ರತಿಯೊಬ್ಬರು ದೇಶದ ಇತಿಹಾಸ, ಆರ್ಥಿಕ ಪರಿಸ್ಥಿತಿ, ಕಾನೂನು, ಹಕ್ಕುಗಳು, ರಾಜಕೀಯ ಅಂಶಗಳನ್ನು ಓದಿ ತಿಳಿಯಬೇಕೆಂದು ಹೇಳಿದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ಮಾತನಾಡಿ, ಸ್ವತಂತ್ರ ಭಾರತದಲ್ಲಿ ಸಂವಿಧಾನವೇ ದೇಶದ ಮೂಲಭೂತ ಕಾನೂ ನಾಗಿದ್ದು, ಅದನ್ನು ಅನುಸರಿಸಿ ಅದಕ್ಕೆ ಬದ್ಧರಾಗಿ ನಡೆಯುವುದು ನಮ್ಮ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಮಾನವ ಹಕ್ಕುಗಳ ಘಟಕದ ಸಂಚಾಲಕಿ ಶಶಿಕಲಾ ಹಾಗೂ ಐಕ್ಯೂಎಸಿ ಸಂಚಾಲಕಿ ಹೇಮ ಉಪಸ್ಥಿತರಿದ್ದರು. ಕನ್ನಡ ಪ್ರಾಧ್ಯಾಪಕ ಅರ್ಜುನ್ ಸ್ವಾಗತಿಸಿ, ವಿದ್ಯಾರ್ಥಿನಿ ನಾಜಿಯಾ ನಿರೂಪಿಸಿ, ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಶಾಂತಿಭೂಷಣ್ ವಂದಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.