ಕುಶಾಲನಗರ, ನ. ೨೮: ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ತಾಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಪ್ರಾಥಮಿಕ ಪ್ರೌಢಶಾಲೆಗಳ ವಿಶೇಷಚೇತನ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ದೈಹಿಕ ನ್ಯೂನತೆ, ಪೂರ್ಣ ಅಂಧತ್ವ, ಬೌದ್ಧಿಕ ಅಸಮರ್ಥತೆ, ಬಹು ವಿಕಲತೆ ಮತ್ತು ಶ್ರವಣದೋಷ ಹಾಗೂ ಮಕ್ಕಳಲ್ಲಿ ನ್ಯೂನತೆ ಹೊಂದಿರುವ ಬಗ್ಗೆ ಆರೋಗ್ಯ ತಪಾಸಣೆ ನಡೆಸಲಾಯಿತು.
ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀರಂಗಧಾಮಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಮನ್ವಯ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ದೈಹಿಕ ನ್ಯೂನತೆ ಹೊಂದಿರುವ ಮಕ್ಕಳ ಪರಿಶೀಲನೆ ನಡೆಸಿದ ವೈದ್ಯರ ತಂಡ ಮಕ್ಕಳಿಗೆ ಅಗತ್ಯತೆ ಉಳ್ಳ ಪರಿಕರಗಳ ಬಗ್ಗೆ ಸಲಹೆ ನೀಡಿದರು. ಸೋಮವಾರ ಪೇಟೆ ಕುಶಾಲನಗರ ವ್ಯಾಪ್ತಿಯ ಪ್ರಾಥಮಿಕ ಪ್ರೌಢಶಾಲೆಗಳ ದೈಹಿಕ ನ್ಯೂನತೆ ಬಹು ವಿಕಲತೆ ಹೊಂದಿರುವ ಅಗತ್ಯತೆವುಳ್ಳ ಮಕ್ಕಳು ಪಾಲ್ಗೊಂಡಿದ್ದರು. ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷಿö್ಮ ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯ ಡಾ. ರವಿಚಂದ್ರ ಅವರ ನೇತೃತ್ವದಲ್ಲಿ ವೈದ್ಯಕೀಯ ತಪಾಸಣೆ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್, ಕ್ಷೇತ್ರ ಸಮನ್ವಯಾಧಿಕಾರಿ ಮಂಜೇಶ್, ಸಮಗ್ರ ಶಿಕ್ಷಣ ಉಪ ಸಮನ್ವಯ ಅಧಿಕಾರಿ ಸೌಮ್ಯ ಪೊನ್ನಪ್ಪ, ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಪುಷ್ಪ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರಾದ ಭಾರತಿ, ಶ್ವೇತ ಹಾಗೂ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಸುಕುಮಾರಿ, ಸಂಪನ್ಮೂಲ ವ್ಯಕ್ತಿಗಳಾದ ಎಂ.ಕೆ. ದಯಾನಂದ, ಹೆಚ್.ಆರ್. ರತ್ನಮ್ಮ, ಕಾರ್ಯಕ್ರಮಕ್ಕೆ ಸಹಯೋಗ ನೀಡಿದ ಕುಶಾಲನಗರ ರೋಟರಿ ಅಧ್ಯಕ್ಷ ಸಿ.ಬಿ. ಹರೀಶ್, ರೆಡ್ಕ್ರಾಸ್ ಸಂಸ್ಥೆಯ ಎಸ್.ಕೆ. ಸತೀಶ್ ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.