ನಾಪೋಕ್ಲು, ಮಾ. ೨೭: ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಶಿಸ್ತಿನ ಜೀವನವನ್ನು ನಡೆಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಸಲಹೆಯಿತ್ತರು.

ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಇಲ್ಲಿಯ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಎಂದಿಗೂ ಅಮಲು ಬರಿಸುವಂತಹ ಪದಾರ್ಥಗಳಿಗೆ ಮಾರುಹೋಗದೆ ಆರೋಗ್ಯವನ್ನು ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಕಾನೂನು ಅರಿವು ಮುಖ್ಯವಾಗಿದೆ ಎಂದರು. ಪ್ರತಿಯೊಬ್ಬರು ಸಂಚಾರಿ ನಿಯಮ, ಸೈಬರ್ ಕ್ರೆöÊಂ, ಡಿಜಿಟಲ್ ಅರೆಸ್ಟ್ ಬಗ್ಗೆ ತಿಳುವಳಿಕೆ ಹೊಂದಿರಬೇಕು ಎಂದು ಅಪರಾಧ ಹಾಗೂ ಕಾನೂನಿನ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.

ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ ಅವರು ಪೋಕ್ಸೋ ಕಾಯ್ದೆ, ಸಂಚಾರಿ ನಿಯಮ ಕಾಯ್ದೆ ಬಗ್ಗೆ ವಿವರಿಸುತ್ತಾ, ವಿದ್ಯಾರ್ಥಿಗಳು ಯಾವುದೇ ಮದ್ಯವ್ಯಸನಗಳಿಗೆ, ಸಾಮಾಜಿಕ ಜಾಲತಾಣಗಳಲ್ಲಿರುವ ಆಮಿಷಗಳಿಗೆ ಮರುಳಾಗದೆ ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮನೋಜ್ ಕುಮಾರ್, ಐಕ್ಯೂ ಸಂಚಾಲಕಿ ಎಸ್. ಆಶಾ, ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.