ಮಡಿಕೇರಿ, ಮಾ. ೩೧: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಡಿಕೇರಿ ಘಟಕವು ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನ ದಿನದ ಅಂಗವಾಗಿ ನಗರದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಮೌನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಈ ಸಂದರ್ಭದಲ್ಲಿ, ವಿದ್ಯಾರ್ಥಿಗಳು ಮಹಾನ್ ಕ್ರಾಂತಿಕಾರಿಗಳ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು. ನಂತರ, ನಗರದ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಅಲ್ಲಿಯೂ ಪುಷ್ಪ ನಮನ ಸಲ್ಲಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಎಬಿವಿಪಿ ಸದಸ್ಯ ಪ್ರಮೋದ್, ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಜೀವನ ಮತ್ತು ಹೋರಾಟದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅವರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುವ ಮೂಲಕ ದೇಶಭಕ್ತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಸಂಚಾಲಕರಾದ ಮಂಜು, ನಗರ ಕಾರ್ಯದರ್ಶಿ ಸಂತೋಷ್, ನಗರ ಸಹ ಕಾರ್ಯದರ್ಶಿ ಸೌಜನ್ಯ ಮತ್ತು ಇತರ ಎಬಿವಿಪಿ ಸದಸ್ಯರು ಉಪಸ್ಥಿತರಿದ್ದರು.